ರಂಗಭೂಮಿಯ ಪ್ರಖ್ಯಾತ ಕಲಾವಿದರಾದ ಆರ್. ಎಸ್. ರಾಜಾರಾಂ ಸಾರ್ ಹೋಗಿಬಿಟ್ರಂತೆ 😢
ಆರ್. ಎಸ್. ರಾಜಾರಾಂ ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನಲ್ಲಿ 1938ರ ಜುಲೈ 10ರಂದು ಜನಿಸಿದರು. ತಂದೆ ಜಿ.ಎಸ್. ರಘುನಾಥರಾವ್. ತಾಯಿ ಶಾರದಾಬಾಯಿ. ರಾಜಾರಾಂ ಅವರು ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗಕ್ಕೆ ಸೇರಿ ಅಧೀನ ಕಾರ್ಯದರ್ಶಿ ಹುದ್ದೆಗೇರಿ ನಿವೃತ್ತಿ ಹೊಂದಿದರು.
ರಂಗಭೂಮಿಯಲ್ಲಿ ಆಸಕ್ತರಾದ ರಾಜಾರಾಂ ಮಲ್ಲೇಶ್ವರದ ಸ್ನೇಹಿತರೊಡನೆ ‘ರಸಿಕ ರಂಜನಿ ಕಲಾವಿದರು’ ಸ್ಥಾಪಿಸಿದರು. ಪರ್ವತವಾಣಿ, ಕೈಲಾಸಂ, ದಾಶರಥಿದೀಕ್ಷಿತ್, ಕೆ. ಗುಂಡಣ್ಣ ಮುಂತಾದವರ ನಾಟಕಗಳಲ್ಲಿ ಅಭಿನಯಿಸಿದರು. ಹಣ ಹದ್ದು, ಮಗು ಮದ್ವೆ, ಪಂಚಭೂತ, ಹೋಂರೂಲು, ‘ಅವರೇ ಇವರು- ಇವರೇ ಅವರು’ ಮೊದಲಾದವು ಇವರ ಕೆಲವು ಪ್ರಸಿದ್ಧ ನಾಟಕಗಳು.
ರಾಜಾರಾಂ ಸರಸ್ವತಿ ಕಲಾ ನಿಕೇತನ, ಪ್ರಧಾನ ಮಿತ್ರ ಮಂಡಲಿ, ಸುಪ್ರಭಾತ ಕಲಾವಿದರು, ಕಮಲ ಕಲಾ ಮಂದಿರ ಮುಂತಾದ ಸಂಸ್ಥೆಗಳೊಡನೆ ನಿರಂತರ ಒಡನಾಟ ಹೊಂದಿದ್ದರು.
ರಾಜಾರಾಂ 1964ರಲ್ಲಿ ಸಚಿವಾಲಯ ಉದ್ಯೋಗಿಗಳೊಡನೆ 'ಸಚಿವಾಲಯ ಸಾಂಸ್ಕೃತಿಕ ಸಂಘ' ಸ್ಥಾಪಿಸಿದರು. ಆ ಮೂಲಕ ಕೋಲ್ಕತ್ತದಲ್ಲಿ ನಡೆದ ಸಚಿವಾಲಯ ಕ್ಲಬ್ ನೌಕರರ ನಾಟಕ ಸ್ಪರ್ಧೆಗಳಲ್ಲಿ ಭಾಗಿಯಾದರು. ಕರ್ನಾಟಕ ಸರಕಾರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಂಗೀತ ಮತ್ತು ನಾಟಕ ವಿಭಾಗದ ಅನೇಕ ನಾಟಕಗಳಲ್ಲಿಯೂ ನಟಿಸಿದರು.
ರಾಜಾರಾಂ ಅವರು 1972ರಿಂದ 'ನಟರಂಗ' ಮತ್ತು 1983ರಿಂದ 'ವೇದಿಕೆ'ಯ ರಂಗ ಚಟುವಟಿಕೆಗಳಲ್ಲಿ ತೊಡಗಿ ಸಿ.ಆರ್. ಸಿಂಹ ಅವರ ನಿರ್ದೇಶನದಲ್ಲಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದರು. ಇದಲ್ಲದೆ ಬಿ.ವಿ. ಕಾರಂತ, ಎಂ.ಎಸ್. ಸತ್ಯು, ಶ್ರೀನಿವಾಸ್ ಜಿ. ಕಪ್ಪಣ್ಣ, ಜಯತೀರ್ಥ ಜೋಶಿ, ಸಿ.ಎಚ್. ಲೋಕನಾಥ್, ಆರ್. ನಾಗೇಶ್, ಪ್ರಕಾಶ್ ಬೆಳವಾಡಿ ಮುಂತಾದವರ ನಿರ್ದೇಶನದಲ್ಲಿ ಮಂಡೋದರಿ, ವಿಗಡವಿಕ್ರಮರಾಯ, ಎಚ್ಚಮನಾಯಕ, ಟಿಪ್ಪುಸುಲ್ತಾನ್, ಕಿತ್ತೂರು ಚೆನ್ನಮ್ಮ, ರಕ್ತಾಕ್ಷಿ, ಸದಾರಮೆ, ಕಾಕನ ಕೋಟೆ, ತುಘಲಕ್, ಮೃಚ್ಛಕಟಿಕ, ಸಂಕ್ರಾಂತಿ, ಅಗ್ನಿ ಮತ್ತು ಮಳೆ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ ಖ್ಯಾತಿ ರಾಜಾರಾಂ ಅವರದ್ದು . ಹೈದರಾಬಾದ್, ಚೆನ್ನೈ, ಕೋಲ್ಕತ್ತಾ, ಕಾಶ್ಮೀರ ಮುಂಬಯಿ, ಚಂಡಿಗರ್ ಮುಂತಾದೆಡೆ ನಾಟಕ ಪ್ರದರ್ಶನದಲ್ಲಿ ಭಾಗಿಯಾದರು.
ರಾಜಾರಾಂ ಹಲವು ಚಲನಚಿತ್ರಗಳು ಮತ್ತು ಕಿರುತೆರೆಯ ಕಥಾನಕಗಳಲ್ಲೂ ಅಭಿನಯಿಸಿದ್ದರು. ರಾಜಾರಾಂ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಮತ್ತು ಪ್ರತಿಷ್ಠಾನಗಳ ಗೌರವಗಳು ಸಂದಿವೆ..
ನಾವು ನೋಡಿ ನಲಿದ ಈ ಹಿರಿಯ ರಂಗ ಕಲಾವಿದರಾದ ಆರ್. ಎಸ್. ರಾಜಾರಾಂ ಸಾರ್ (2021ರ ಮೇ 10ರಂದು) ಇನ್ನಿಲ್ಲ ಎಂಬುದು ದುಃಖ ತಂದಿದೆ. ಕೆಲವು ದುಃಖಕ್ಕೆ ಕಾರಣಗಳುಂಟು ಪರಿಹಾರವಿಲ್ಲ. 'ಪಳಗಿದ್ದ ಮನೆ ಕುಂಟ ಕುರುಡನ ತೆರದಿ ತಳಮಳಿಸುತಿದೆ ಲೋಕ ಮಂಕುತಿಮ್ಮ' ಎಂಬ ಮಾತು ಮತ್ತಷ್ಟು ಮಂಕು ಕವಿಸುತ್ತಿದೆ.
ಕ್ರಪೆ - 'ಕನ್ನಡ ಸಂಪದ' FB

Social Plugin