ತುರ್ತುಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ.ಜಿಲ್ಲೆಯಲ್ಲಿ ವ್ಯಾಪಕ ಮಳೆ: ವೇದಗಂಗಾ ನದಿಪಾತ್ರಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ.
ವರದಿ : ಮಲ್ಲಿಕಾರ್ಜುನ ಘೋಸರವಾಡ.

ಬೆಳಗಾವಿ : ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ್ ಅವರು ವೇದಗಂಗಾ ನದಿ ಪಾತ್ರದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
 ನಿಪ್ಪಾಣಿ ಸಮೀಪದ ಜಾತ್ರಾಟ ಹಾಗೂ ಅಕ್ಕೋಳ ಸುತ್ತಮುತ್ತಲಿನ ಪ್ರದೇಶಗಳಿಗೆ ಶುಕ್ರವಾರ (ಜೂನ್ 18) ಭೇಟಿ ನೀಡಿದ ವೇದಗಂಗಾ ನದಿಯ ಹರಿವು ಪ್ರಮಾಣವನ್ನು ವೀಕ್ಷಿಸಿದರು.
 ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ್ ಅವರ. ನದಿ ನೀರಿನ ಪ್ರಮಾಣ ಹೆಚ್ಚಾದರೆ ಮುಂಜಾಗೃತಾ ಕ್ರಮವಾಗಿ ನದಿತೀರದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸೂಚನೆ ನೀಡಿದರು.
 ಸಂಭವನೀಯ ಪ್ರವಾಹ ಹಾವು ಅತಿವೃಷ್ಟಿಯ0ತಹ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
 ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರುದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಸದ್ಯಕ್ಕೆ ಪ್ರವಾಹ ಭೀತಿ ಇಲ್ಲ. ಅದಾಗಿಯೂ ನದಿಗಳ ನೀರಿನ ಮಟ್ಟ ಹಾಗೂ ಮಳೆಯ ಪ್ರಮಾಣದ ಮೇಲೆ ಸಂಬಂಧಿಸಿದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು.
ನದಿತೀರದ ಗ್ರಾಮಗಳ ಜನರಿಗೆ ಆಗಾಗಿ ಸೂಕ್ತ ಮುನ್ನೆಚ್ಚರಿಕೆಯನ್ನು ನೀಡಬೇಕು. ಒಂದು ವೇಳೆ ಪ್ರವಾಹ ಸ್ಥಿತಿ ಉದ್ಭವಿಸಿದರೆ ತಡಮಾಡದೇ ಜನರನ್ನು ಹಾಗೂ ಜಾನುವಾರುಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು.
  ಪ್ರವಾಹ ಭೀತಿ ಎದುರಿಸುತ್ತಿರುವ ಜಿಲ್ಲೆಯ 377 ಗ್ರಾಮಗಳ ಜನರನ್ನು ತುರ್ತು ಸಂದರ್ಭದಲ್ಲಿ ಸ್ಥಳಾಂತರಿಸಲು ಅಗತ್ಯವಿರುವ ಕಾಳಜಿ (ಪರಿಹಾರ) ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದೆ. ಸಮೀಪದಲ್ಲಿರುವ ಅನಿಗದಿತ ಕಾಳಜಿ ಕೇಂದ್ರಗಳಿಗೆ ಜನರನ್ನು ಸ್ಥಳಾಂತರಿಸಬೇಕು ಎಂದು ತಹಸೀಲ್ದಾರ್ ಹಾಗೂ ಇತರ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ನಿರ್ದೇಶನ ನೀಡಿದರು.
 ಚಿಕ್ಕೋಡಿ ಉಪವಿಭಾಗ ಅಧಿಕಾರಿ ಯೋಗೇಶ್ ಕುಮಾರ್ ನಿಪ್ಪಾಣಿ ತಸಿಲ್ದಾರ್ ಹಾಗೂ ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.