ವರದಿ ಮುರಿಗೆಪ್ಪ ಮಾಲಗಾರ ಹಳ್ಳೂರ:20: ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ನೂತನ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಮಂಗಳವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಹೊಸ ತಾಲೂಕುಗಳ ಪೈಕಿ ಮೂಡಲಗಿ ತಾಲೂಕಿಗೆ ಮಾತ್ರ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಆರಂಭಿಸಲಾಗಿದ್ದು, ಇದಕ್ಕೆ ಇಲ್ಲಿನ ಜನಪ್ರೀಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಒತ್ತಡವೇ ಕಾರಣವೆಂದು ತಿಳಿಸಿದರು.ಬಾಲಚಂದ್ರ ಜಾರಕಿಹೊಳಿ ಅವರು ಅನೇಕ ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಮಿಂಚಿನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ, ಪ್ರತಿ ಇಲಾಖೆಗಳ ಅನುದಾನವನ್ನು ತಂದು ಕ್ಷೇತ್ರವನ್ನು ಪ್ರಗತಿ ಪಥದತ್ತ ಮುನ್ನಡೆಸುತ್ತಿದ್ದಾರೆ, ಜೊತೆಗೆ ಕೆ.ಎಂ.ಎಫ್ ಅಧ್ಯಕ್ಷರಾಗಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ರಾಜ್ಯದಲ್ಲಿರುವ ಎಲ್ಲ ಸ್ಲಂ ಪ್ರದೇಶಗಳ ನಾಗರಿಕರಿಗೆ ಉಚಿತವಾಗಿ ನಂದಿನಿ ಹಾಲನ್ನು ನೀಡಿದ್ದಾರೆ. ಬಾಲಚಂದ್ರ ಅವರು ಕೇವಲ ಈ ಭಾಗಕ್ಕೆ ಕೊಡುಗೈ ದಾನಿಗಳಲ್ಲ. ಬೆಂಗಳೂರಿಗೂ ಸಹ ಕೊಡುಗೈ ದಾನಿಗಳಾಗಿ ಹೆಸರು ವಾಸಿಯಾಗಿದ್ದಾರೆ ಎಂದು ಶಾಸಕರ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅವರು, ಬರುವ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಈ ಭಾಗದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅತ್ಯಧಿಕ ಮತಗಳ ಮುನ್ನಡೆಯೊಂದಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿಕೊಂಡರು.ನಿಮ್ಮ ಕೆಲ್ಸ್ ಮಾಡ್ತಿದ್ದೀನಿ. ಒನ್ ಸೈಡ್ ವೋಟ್ ಮಾಡಿ ಗೆಲ್ಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆ ವಹಿಸಿದ್ದ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಮೂಡಲಗಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಲೋಕಾರ್ಪಣೆಗೊಳಿಸುವ ಮೂಲಕ ಈಡೇರಿಸಿದ್ಧೇನೆ, ಈ ಕಛೇರಿಗೆ ತಾಲೂಕಿನ 48 ಗ್ರಾಮಗಳು ಸೇರ್ಪಡೆಯಾಗಿದ್ದು, ನಾಳೆಯಿಂದಲೇ ಸಾರ್ವಜನಿಕರಿಗೆ ಕಾರ್ಯ ಚಟುವಟಿಕೆಗಳು ಆರಂಭವಾಗಲಿದೆ. ಇನ್ನಾದರೂ ಮೂಡಲಗಿ ತಾಲೂಕಿನ ಜನತೆ ಬರುವ ಚುನಾವಣೆಯಲ್ಲಿ ಹೆಚ್ಚಿನ ಲೀಡ್ ನೀಡಿ ಮತ್ತೋಮ್ಮೆ ಜನಸೇವೆಗೆ ಅವಕಾಶ ಕಲ್ಪಿಸಿಕೊಡುವಂತೆ ಕೋರಿಕೊಂಡರು. ರಾಜ್ಯದಲ್ಲಿ 17 ಮಿನಿ ವಿಧಾನಸೌಧ ನಿರ್ಮಾಣಕ್ಕೆ ತಲಾ 10 ಕೋಟಿ ರೂಪಾಯಿ ಅನುದಾನ ಸರಕಾರ ಮಂಜೂರು ಮಾಡಿದ್ದು, ಅದರಲ್ಲಿ ಮೂಡಲಗಿ ತಾಲೂಕಿಗೂ ಸಹ ಅನುದಾನ ಬಂದಿದೆ. ಫೆಬ್ರುವರಿ ತಿಂಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲ್ಲಿದ್ದು. ವಿವಿಧ ಇಲಾಖೆಗಳ ಏಳು ಕಚೇರಿಗಳು ಕರ್ತವ್ಯ ನಿರ್ವಹಿಸಲ್ಲಿವೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ, ಪ್ರತಿ ವಿಧಾನ ಸಭಾ ಕ್ಷೇತ್ರಗಳಿಗೆ 50 ರಿಂದ 100 ಕೋಟಿ ರೂಪಾಯಿಗಳವರಿಗೆ ಅಭಿವೃದ್ಧಿಗಾಗಿ ಅನುದಾನ ನೀಡಿದ್ದಾರೆ. ಅದರಂತೆ ನಮ್ಮ ಕ್ಷೇತ್ರಕ್ಕೂ ಸಹ ರಸ್ತೆಗಳ ಸುಧಾರಣೆಗಾಗಿ ಹಣ ಬಿಡುಗಡೆ ಮಾಡಿದ್ದಾರೆ. ಮುಂದಿನ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ, ಮೂಡಲಗಿ ಪಟ್ಟಣದ ಅಭಿವೃದ್ಧಿಗೆ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ ಅವರ ಮೂಲಕ ಹೆಚ್ಚಿನ ಅನುದಾನ ತರುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಕುಡಿಯುವ ನೀರಿಗಾಗಿ ಅರಭಾವಿ ಕ್ಷೇತ್ರಕ್ಕೆ 30ಕೋಟಿ ರೂಪಾಯಿ ಬಿಡುಗಡೆ :ಸಚಿವ ಭೈರತಿ ಬಸವರಾಜ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಬೇಕು, ನಾನು ಕೂಡಾ ಸಮಾಜದ ಮುಖಂಡನಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ರಾಜ್ಯದಲ್ಲಿ ದಾಹ ಮುಕ್ತ ಮಾಡಲು 9 ಸಾವಿರಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ. ಅರಭಾವಿ ಕ್ಷೇತ್ರಕ್ಕೆ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ 30 ಕೋಟಿ ರೂಪಾಯಿ ಹಣವನ್ನು ಕುಡಿಯುವ ನೀರಿಗಾಗಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಸಾನಿಧ್ಯವನ್ನು ದತ್ತಾತ್ರೇಯಬೋಧ ಸ್ವಾಮಿಜಿ ವಹಿಸಿದ್ದರು. ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ.ಶಶಿಧರ ಬಗಲಿ, ಜಿಲ್ಲಾನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ, ತಹಶೀಲ್ದಾರ ಡಿ.ಜಿ.ಮಹಾತ್. ಶಿವಾನಂದ ಬಬಲಿ. ಪರಸಪ್ಪ ನಾಯ್ಕ. ಸದಾಶಿವ ಹೊಸಮನಿ.ಸಂಜು ಅಗ್ನೇಪ್ಪಗೋಳ. ಭೀಮಶಿ ಮಗದುಮ್. ಹಣಮಂತ ತೇರದಾಳ. ಸಂತೋಷ ಸೋನಾವಲ್ಕರ. ಸುಭಾಸ ಪಾಟೀಲ. ಉಪನೋಂದಣಿ ಅಧಿಕಾರಿ ಹರಿಯಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಚಿವ ಆರ್.ಅಶೋಕ್ ಅವರಿಗೆ ಕೃಷ್ಣನ ಕಂಚಿನ ಪ್ರತಿಮೆ ಹಾಗೂ ಇನ್ನೋರ್ವ ಸಚಿವ ಬೈರತಿ ಬಸವರಾಜ ಅವರಿಗೆ ಬೆಳ್ಳಿ ಗಣೇಶನ ಮೂರ್ತಿಯನ್ನು ನೀಡಿ ಸತ್ಕರಿಸಿದರು.
ನಮ್ಮ ಬಿಜೆಪಿ ಸರಕಾರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪವರ್ ಫುಲ್ ಲೀಡರ್ ಎಂದ ಸಚಿವ ಆರ್.ಅಶೋಕ್ ಅವರು, ಬೆಂಗಳೂರಿಗೆ ಬಂದಾಗಲೆಲ್ಲ ಮುಖ್ಯಮಂತ್ರಿ ಸೇರಿದಂತೆ ಸಂಬಂಧ ಪಟ್ಟ ಹಲವಾರು ಮಂತ್ರಿಗಳನ್ನು ಭೇಟಿ ಮಾಡಿ ಅರಭಾವಿ ಅಭಿವೃದ್ಧಿ ಕೆಲಸಗಳಿಗೆ ಕಡತಗಳಿಗೆ ಅನುಮತಿ ಪಡೆದುಕೊಂಡೇ ಹೋಗುತ್ತಾರೆ.
– ಆರ್.ಅಶೋಕ್, ಕಂದಾಯ ಸಚಿವ

ನಮ್ಮ ಬಿಜೆಪಿ ಸರಕಾರ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿದೆ. ಬಾಕಿ ಉಳಿದಿರುವ ಐದು ತಿಂಗಳ ಅವಧಿಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಪರ ಕಾರ್ಯಗಳನ್ನು ಕೈಗೊಳ್ಳುತ್ತೇವೆ. ಮತ್ತೇ ಬಿಜೆಪಿ ಅಧಿಕಾರಕ್ಕೆರಲಿದ್ದು, ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.