"ರಾಘು" ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದಲ್ಲಿ ಮೂಡಿ ಬರಲಿದೆ ಡಾರ್ಕ್ ಕಾಮಿಡಿ ಥ್ರಿಲ್ಲರ್ ಕಥಾಹಂದರದ ಈ ಚಿತ್ರ.
ತಮ್ಮ ಸಹಜ ಅಭಿನಯದ ಮೂಲಕ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ಅನಿರುದ್ಧ್ ಜತ್ಕರ್ ನೂತನ ಚಿತ್ರವೊಂದರ ನಾಯಕನಾಗಿ ನಟಿಸುತ್ತಿದ್ದಾರೆ. ಎಂ.ಆನಂದರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಇತ್ತೀಚೆಗೆ ಮೈಸೂರಿನ ಡಾ||ವಿಷ್ಣುವರ್ಧನ್ ಸ್ಮಾರಕದಲ್ಲಿ ನೆರವೇರಿಸಲಾಯಿತು. ಭಾರತಿ ವಿಷ್ಣುವರ್ಧನ್ ಅವರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆಗಸ್ಟ್ 10 ರಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ತುಮಕೂರು ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.
ಇದೇ ವರ್ಷ ತೆರೆಕಂಡಿದ್ದ ವಿಜಯ ರಾಘವೇಂದ್ರ ಅಭಿನಯದ "ರಾಘು" ಚಿತ್ರವನ್ನು ನಿರ್ದೇಶಿಸಿದ್ದ ಆನಂದ್ ರಾಜ್ ಈ ನೂತನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಿರ್ದೇಶಕರೆ ಕಥೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆಯುತ್ತಿದ್ದಾರೆ. ಉಳಿದಂತೆ ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಆಶಿಕ್ ಕುಸುಗೊಳ್ಳಿ ಡಿ.ಐ(ವಿಕ್ರಾಂತ್ ರೋಣ ಖ್ಯಾತಿ), ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಸೌಂಡ್ ಡಿಸೈನರ್ ಆಗಿ ಬಿ.ಆರ್ ನವೀನ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್ 2 ಖ್ಯಾತಿ) ಅಭಿನಯಿಸುತ್ತಿದ್ದಾರೆ.
ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಡಾರ್ಕ್ ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ.

Social Plugin