ಕುತೂಹಲ ಮೂಡಿಸಿದೆ ಆದಿತ್ಯ ಅಭಿನಯದ "ಕಾಂಗರೂ" ಚಿತ್ರದ  ಟ್ರೇಲರ್...


ಬಹು ನಿರೀಕ್ಷಿತ ಈ ಚಿತ್ರ ಮೇ 3 ರಂದು ಬಿಡುಗಡೆ 

ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚೆನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್‌ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲಾರ ಮಂಡ್ಯ ಹಾಗೂ ಕೆ.ಜಿ.ಆರ್.ಗೌಡ ನಿರ್ಮಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ "ಕಾಂಗರೂ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಟ್ರೇಲರ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 3 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.


  ನಿರ್ಮಾಪಕರೇ ನಮ್ಮ ಅನ್ನದಾತರು. ಹಾಗಾಗಿ ಅವರಿಂದಲೇ ಟ್ರೇಲರ್ ರಿಲೀಸ್ ಮಾಡಿಸಬೇಕೆಂದು ನಾನು ಹಾಗೂ  ನಿರ್ದೇಶಕರು ಅಂದುಕೊಂಡೆವು. ಈ ಚಿತ್ರದ ನಿರ್ಮಾಪಕರೆ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.  ಚಿತ್ರದಲ್ಲಿ ಹಾರರ್ ಇದೆ, ಸಸ್ಪೆನ್ಸ್ ಇದೆ, ಥ್ರಿಲ್ಲರ್ ಇದೆ, ಎಲ್ಲಕ್ಕಿಂತ ಹೆಚ್ಚಾಗಿ ತಾಯಿ ಹೃದಯದ ಮಮತೆಯಿದೆ, 'ನೀನೊಂದು ಮುಗಿಯದ ಮೌನ' ದಂಥ ಎವರ್ ಗ್ರೀನ್  ಹಾಡನ್ನು ನನಗೆ ಕೊಟ್ಟವರು ಸಾಧು ಕೋಕಿಲ. ಅವರು ಮತ್ತೊಮ್ಮೆ ನನ್ನ ಚಿತ್ರಕ್ಕೆ ಅದ್ಭುತವಾದ ಮ್ಯೂಸಿಕ್ ಮಾಡಿಕೊಟ್ಟಿದ್ದಾರೆ. ಸಂಗೀತದ ನಂತರ ನಮ್ಮ ಚಿತ್ರದ ಮತ್ತೊಂದು ಹೈಲೈಟ್ ಎಂದರೆ ಕ್ಯಾಮೆರಾ ವರ್ಕ್, ಉದಯಲೀಲಾ ಅವರು ಅದ್ಭುತವಾಗಿ ಛಾಯಾಗ್ರಹಣ ಮಾಡಿಕೊಟ್ಟಿದ್ದಾರೆ. ನಾನು ಈ ಚಿತ್ರದಲ್ಲಿ ತನಿಖಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಮೇ 4 ನನ್ನ ಹುಟ್ಟುಹಬ್ಬ. ಮೇ 3 ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದು ನಾಯಕ ನಟ ಆದಿತ್ಯ "ಕಾಂಗರೂ"  ಚಿತ್ರದ ಕುರಿತಂತೆ  ಹೇಳಿದರು.

 ಟ್ರೇಲರ್ ರಿಲೀಸ್ ಮಾಡಿದ ನಂತರ ನಿರ್ಮಾಪಕ ರಮೇಶ್ ಬಂಡೆ ಮಾತನಾಡಿ, ನಾವು 6 ಜನ ಸ್ನೇಹಿತರು ಪೀಣ್ಯದಲ್ಲಿ ಇಂಡಸ್ಟ್ರಿ ನಡೆಸುತ್ತಿದ್ದೇವೆ. ಏನಾದರೂ ಹೊಸತನ್ನು ಮಾಡೋಣ ಅಂತ ಈ ಸಿನಿಮಾ ಮಾಡಿದ್ದೇವೆ, ಜನ ಕೊಟ್ಟ ದುಡ್ಡಿಗೆ ನ್ಯಾಯ ಒದಗಿಸುತ್ತೇವೆ ಎಂದು ಹೇಳಿದರು. ರವಿ ಕೀಲಾರ ಮಂಡ್ಯ ಮಾತನಾಡುತ್ತ ನಿರ್ದೇಶಕರು ಅನಿಮೇಶನ್‌ನಲ್ಲೇ  ಚಿತ್ರವನ್ನು ನಮಗೆ ತೋರಿಸಿದ್ದರು, ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ  ಎಂದು ಹೇಳಿದರು. 


ಮತ್ತೊಬ್ಬ ನಿರ್ಮಾಪಕ  ಚೆನ್ನಕೇಶವ ಮಾತನಾಡುತ್ತ  ಕನ್ನಡದ ಜನರಿಗಾಗಿ ಒಳ್ಳೆಯ ಸಿನಿಮಾ ಮಾಡಿರುವ ಖುಷಿಯಿದೆ. ಚಿತ್ರದ ಮೋಷನ್ ಪೋಸ್ಟರನ್ನು ಶಿವರಾಜಕುಮಾರ್ ರಿಲೀಸ್ ಮಾಡಿಕೊಟ್ಟಿದ್ದರು. ಇನ್ನು ಸಾಧು ಕೋಕಿಲ ಉತ್ತಮ ಮ್ಯೂಸಿಕ್ ಮಾಡಿದ್ದಾರೆ.  ನಮ್ಮ ಚಿತ್ರಕ್ಕೆ ಜನ ಬೆಂಬಲ ದೊರೆತರೆ , ಇನ್ನೂ  ಹತ್ತಾರು ಸಿನಿಮಾ  ಮಾಡುತ್ತೇವೆ ಎಂದರು.   ನಿರ್ಮಾಪಕರಾದ ಸ್ವಾಮಿ ಚಕ್ರಭಾವಿ, ಕೆ.ಜಿ.ಆರ್. ಗೌಡ, ಮ ಜೋಗ್ ಸ ಚಕ್ರಭಾವಿ ಅವರು ಸಹ ಚಿತ್ರದ ಕುರಿತು ಮಾತನಾಡಿದರು. 
ಆದಿತ್ಯ ಅವರಿಗೆ ನಾಯಕಿಯಾಗಿ  ರಂಜನಿ ರಾಘವನ್ ಅಭಿನಯಿಸಿದ್ದಾರೆ. ಈ ಕುರಿತು ಮಾತನಾಡಿದ  ಅವರು, ನಾನು ಆದಿತ್ಯ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವಳು, ಈ ಚಿತ್ರದಲ್ಲಿ ಅವರ ಜೊತೆಗೆ ಅಭಿನಯಿಸುವ ಅವಕಾಶ ಸಿಕ್ಕಿತ್ತು. ಒಬ್ಬ ಪ್ರೇಕ್ಷಕಳಾಗಿ ನಾನು ಸಿನಿಮಾನ ನೋಡಿದ್ದೇನೆ. ನಿರ್ದೇಶಕರು ಪ್ರತಿ ಪಾತ್ರವನ್ನು ಅಚ್ಚುಕಟ್ಟಾಗಿ ತಂದಿದ್ದಾರೆಂದು ಹೇಳಿದರು.

ನಿರ್ದೇಶಕ  ಕಿಶೋರ್ ಮೇಗಳಮನೆ  ಮಾತನಾಡಿ,  ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಕಥೆಗೆ ತಕ್ಕಂತೆ ಖರ್ಚಾಗಿದೆ. ೧೫೦ ರಿಂದ ೨೦೦ ಥಿಯೇಟರ್‌ಗಳಲ್ಲಿ ರಿಲೀಸ್ ಮಾಡುತ್ತಿದ್ದೇವೆ.  ವಿಶೇಷವಾಗಿ  ಫ್ಯಾಮಿಲಿ ಆಡಿಯನ್ಸ್ ಗಾಗಿ  ಮಾಡಿದ  ಕಥೆ, ಬೆಂಗಳೂರು, ಶೃಂಗೇರಿ, ಚಿಕ್ಕಮಗಳೂರು, ಕೊಪ್ಪ  ಹಾಗೂ ಹೊರನಾಡು ಸುತ್ತಮುತ್ತ  ಚಿತ್ರೀಕರಿಸಿದ್ದೇವೆ.  ಯೂ ಟರ್ನ್  ಚಿತ್ರದ ಇನ್‌ ಸ್ಪೈರ್ ನಿಂದ ಈ ಚಿತ್ರ ನಿರ್ದೇಶನ ಮಾಡಿದ್ದೇನೆ. ಒಂದು ಸಣ್ಣ ತಪ್ಪಿನಿಂದ ಮುಂದೆ ಏನೇನೆಲ್ಲ ಆಗಬಹುದೆಂದು ಚಿತ್ರದಲ್ಲಿ ತೋರಿಸಿದ್ದೇವೆ ಎಂದು ಹೇಳಿದರು.